ರಾಷ್ಟ್ರೀಯ ಸಮ್ಮೇಳನದಲ್ಲಿ ಯಲ್ಲಾಪುರ GFGC ವಿದ್ಯಾರ್ಥಿನಿಯರ ಗಮನಾರ್ಹ ಸಾಧನೆ
ಯಲ್ಲಾಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡು ವಿಶೇಷ ಪ್ರಬಂಧಗಳನ್ನು ಮಂಡಿಸಿ ಗಮನ ಸೆಳೆದಿದ್ದಾರೆ.
ಈ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿನಿ ಆಶಾ ಸಿ. ನಾಯಕ ಅವರು ಗದಗದ ಜಗದ್ಗುರು ತೋಂಟದಾರ್ಯ ಕಾಲೇಜಿನಲ್ಲಿ ನಡೆದ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಯಲ್ಲಾಪುರ ತಾಲೂಕಿನಲ್ಲಿ ಮಾನವ ವನ್ಯಜೀವಿ ಸಂಘರ್ಷ ಮತ್ತು ಬೆಳೆ ನಷ್ಟ: ರೈತರ ಅಭಿಪ್ರಾಯ ಹಾಗೂ ನಿರ್ವಹಣಾ ತಂತ್ರಗಳು ಎಂಬ ಸಂಶೋಧನಾ ಪ್ರಬಂಧವನ್ನು ಮಂಡಿಸಿ, ಅತ್ಯುತ್ತಮ ಪ್ರಬಂಧ ಪ್ರಸ್ತುತಿಕರಣ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಸಮ್ಮೇಳನದಲ್ಲಿ 71 ಪ್ರಬಂಧಗಳು ಮಂಡನೆಯಾಗಿದ್ದವು. ಇದೇ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ಜಿ. ಗೌಡ ಅವರು ಯಲ್ಲಾಪುರ ತಾಲೂಕಿನ ಸಿದ್ದಿ ಸಮುದಾಯದಲ್ಲಿ ಡಿಜಿಟಲೀಕರಣ ಮತ್ತು ಆರ್ಥಿಕ ಸಬಲೀಕರಣ ಎಂಬ ಪ್ರಬಂಧವನ್ನು ಪ್ರಸ್ತುತಪಡಿಸಿ ಗಮನ ಸೆಳೆದರು. ಅವರ ಅಧ್ಯಯನವು ಡಿಜಿಟಲ್ ತಂತ್ರಜ್ಞಾನಗಳ ಮೂಲಕ ಆದಾಯ ವೃದ್ಧಿ ಮತ್ತು ಆರ್ಥಿಕ ಒಳಗೊಳ್ಳುವಿಕೆಯ ಮಹತ್ವವನ್ನು ವಿವರಿಸುತ್ತದೆ. ಇವರ ಸಂಶೋಧನಾ ಲೇಖನವೂ ಪ್ರಕಟಗೊಂಡಿದೆ.
ಕಾಲೇಜಿನ ಪ್ರಾಂಶುಪಾಲ ಡಾ. ಆರ್. ಡಿ. ಜನಾರ್ಧನ್ ಹಾಗೂ ಐಕ್ಯುಎಸಿ ಸಂಯೋಜಕ ಡಾ. ಓಂಪ್ರಕಾಶ ನಾಯಕ್ ಅವರ ಮಾರ್ಗದರ್ಶನ ಮತ್ತು ಪ್ರೋತ್ಸಾಹದೊಂದಿಗೆ ವಿದ್ಯಾರ್ಥಿನಿಯರು ಈ ಸಾಧನೆ ಮಾಡಿದ್ದಾರೆ.
ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯವು ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಬೆಳೆಸುವ ದಿಸೆಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮ್ಮೇಳನಗಳು, ಕಾರ್ಯಾಗಾರಗಳು ಹಾಗೂ ಐಕ್ಯುಎಸಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದೆ.ವಿದ್ಯಾರ್ಥಿನಿಯರ ಈ ಸಾಧನೆಯು ಮಹಾವಿದ್ಯಾಲಯದ ಶೈಕ್ಷಣಿಕ ಗುಣಮಟ್ಟ ಮತ್ತು ಸಂಶೋಧನಾ ವಾತಾವರಣಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ.