ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಿ: ಶಾಸಕ ಶಿವರಾಮ ಹೆಬ್ಬಾರ್
ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮವು ಶನಿವಾರ ಅದ್ದೂರಿಯಾಗಿ ನಡೆಯಿತು.
ಶಾಸಕ ಶಿವರಾಮ ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇಂತಹ ವಾರ್ಷಿಕೋತ್ಸವಗಳು ವಿದ್ಯಾರ್ಥಿಗಳಲ್ಲಿರುವ ಕೌಶಲ್ಯ ಹಾಗೂ ಸೃಜನಶೀಲತೆಯನ್ನು ಹೊರಹೊಮ್ಮಿಸಲು ಉತ್ತಮ ವೇದಿಕೆಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಡಿ.ಜನಾರ್ದನ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಭಾವನಾತ್ಮಕ ಕೌಶಲ್ಯತೆಯನ್ನು ಮೈಗೂಡಿಸಿಕೊಳ್ಳಬೇಕು. ವ್ಯಕ್ತಿತ್ವ ನಿರ್ಮಾಣ ಹಾಗೂ ಪ್ರಬುದ್ಧ ನಿಲುವುಗಳಿಂದ ಹೆಚ್ಚಿನ ಸಾಧನೆ ಮಾಡಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಅಕ್ಷರಧಾರೆ ವಿಶೇಷ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ ಮಿರಾಶಿ, ಪ.ಪಂ ಮಾಜಿ ಅಧ್ಯಕ್ಷರಾದ ಶಿರೀಷ್ ಪ್ರಭು, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಡಿ.ಎನ್.ಗಾಂವ್ಕರ್, ತಾಲೂಕಾಧ್ಯಕ್ಷ ಉಲ್ಲಾಸ್ ಶಾನಭಾಗ ಮುಂತಾದವರು ಇದ್ದರು. ಉಪನ್ಯಾಸಕ ಡಾ.ಓಂಪ್ರಕಾಶ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಕೀನಾ ನಿರ್ವಹಿಸಿದರು.