ಮಾತೃಭಾಷೆಯನ್ನು ಎಲ್ಲರೂ ಗೌರವಿಸಬೇಕು: ಶಾಸಕ ಶಿವರಾಮ ಹೆಬ್ಬಾರ್
ನಮ್ಮ ಮಾತೃಭಾಷೆಯಾದ ಕನ್ನಡದ ಬಗ್ಗೆ ನಮಗೆ ಗೌರವ ಇರಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.
ಶುಕ್ರವಾರ ಮಧ್ಯಾಹ್ನ ಯಲ್ಲಾಪುರ ಪಟ್ಟಣದ ಟಿ.ಎಂ.ಎಸ್.ಸಭಾಭವನದಲ್ಲಿ ನಡೆದ, 2025-26 ನೇ ಸಾಲಿನ ಎಸ್.ಎಸ್.ಎಲ್.ವಾರ್ಷಿಕ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು,
ನಮ್ಮ ಮಾತೃಭಾಷೆ, ನೆಲ, ಜಲದ ಬಗ್ಗೆ ನಮಗೆ ಅಭಿಮಾನ ಇರಬೇಕು, ಇಂದಿನ ಕಾಲದಲ್ಲಿ ವ್ಯಾವಹಾರಿಕ ಭಾಷೆಯಾದ ಇಂಗ್ಲೀಷ್ ಕಲಿಕೆಯೂ ಅಗತ್ಯವಾಗಿದ್ದು, ಇತರ ಭಾಷೆಗಳ ಬಗ್ಗೆ ದ್ವೇಷಭಾವನೆ ಬೇಡ. ಭಾಷಾ ಸಾಮರಸ್ಯದಿಂದ ಮಾತೃಭಾಷೆಯೊಂದಿಗೆ ಬದುಕಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ಮಾತನಾಡಿದರು.
ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಜಯ ನಾಯಕ, ಸಾಹಿತಿ ಟಿ.ವಿ.ಕೋಮಾರ್, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್,
ತಾಲೂಕಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ ಪಾಲನಕರ್ ಮುಂತಾದವರು ಮಾತನಾಡಿದರು.ತಾಲೂಕಾ ಕಸಾಪ ಅಧ್ಯಕ್ಷ ವಿ.ಸುಬ್ರಹ್ಮಣ್ಯ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಸಾಪ ಗೌರವ ಕಾರ್ಯದರ್ಶಿಗಳಾದ ಜಿ.ಎನ್.ಭಟ್ ತಟ್ಟಿಗದ್ದೆ ಸ್ವಾಗತಿಸಿದರು, ಸಂಜೀವ ಕುಮಾರ ಹೊಸ್ಕೇರಿ ನಿರ್ವಹಿಸಿದರು. ಖಜಾಂಚಿ ಡಿ.ಎನ್.ಗಾಂವ್ಕಾರ್ ವಂದಿಸಿದರು.