ಜಿಲ್ಲೆಯಾದ್ಯಂತ ಜೂ.28 ರಂದು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳು ಲಸಿಕೆ ಪಡೆಯುವಂತೆ ಹಾಗೂ ಜಿಲ್ಲೆಯ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಎಚ್ಚರವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಅವರು ಸೋಮವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜೂ.28 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಲಸಿಕೆ ಹಾಕಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಒಟ್ಟು 873 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 89,388 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಟ್ರಾನ್ಸಿಟ್ ಸೈಟ್ಗಳು ಮತ್ತು ವಿಶೇಷ ಪ್ರದೇಶಗಳಲ್ಲಿ ಲಸಿಕಾ ಅಭಿಯಾನ ನಡೆಯಲಿದ್ದು, ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು. ಪೋಲಿಯೋ ಲಸಿಕಾ ಅಭಿಯಾನಕ್ಕೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಆಶಾ ಕಾರ್ಯಕರ್ತೆಯರು ತಮಗೆ ವಹಿಸಿದ ಕೆಲಸಗಳನ್ನು ಸರಿಯಾಗಿ ನಿರ್ವಹಿಸುವಂತೆ ಸೂಚಿಸಿದ ಅವರು, ಜೂ.27 ರಂದು ಪಲ್ಸ್ ಪೋಲಿಯೋ ಜಾಥಾ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.
ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಪ್ಯಾಕ್ ಗಳನ್ನು ತಯಾರಿಸಲು ನಿರಂತರ ವಿದ್ಯುತ್ ಪೂರೈಕೆಯ ಅವಶ್ಯಕತೆ ಇರುವುದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸದಂತೆ, ನಿರಂತರ ವಿದ್ಯುತ್ ಸರಬರಾಜು ಮಾಡಲು ಕ್ರಮವಹಿಸಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಘ ಸಂಸ್ಥೆಗಳು ವಿವಿಧ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರ ಪ್ರದೇಶದಲ್ಲಿ ಸಾರ್ವಜನಿಕರಲ್ಲಿ ಪೋಲಿಯೋ ಲಸಿಕೆಯ ಬಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸಬೇಕು. ಕಟ್ಟಡ ಕಾರ್ಮಿಕರ ಮಕ್ಕಳು, ವಲಸೆ ಬಂದ ಕುಟುಂಬ ಹಾಗೂ ಕೊಳಚೆ ಪ್ರದೇಶದಲ್ಲಿ ವಾಸವಿರುವ 5 ವರ್ಷದೊಳಗಿನ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಕ್ರಮವಹಿಸಬೇಕು ಎಂದರ ಇದೇ ಸಂದರ್ಭದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಲ್ಲಾಭಕ್ಷ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ ರಾವ್, ಆರ್.ಸಿ.ಎಚ್ ಅಧಿಕಾರಿ ಡಾ.ನಟರಾಜ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ ರಾವ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಿನಿ ಬೋರ್ಕರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು ಮತ್ತಿತರರು ಇದ್ದರು