






ಸೂಕ್ತ ದಾಖಲೆಗಳಿರುವ ಅಡಿಕೆ ಸಾಗಾಣಿಕೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಭರವಸೆ

ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಹತ್ವದ ಸಭೆ ನಡೆಯಿತು.

ಈ ಸಭೆಯಲ್ಲಿ ಶಾಸಕ ಹಾಗೂ ಅಡಿಕೆ ಟಾಸ್ಕ್ ಪೋರ್ಸ್ ಅಧ್ಯಕ್ಷ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿ. ವೈ. ರಾಘವೇಂದ್ರ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ರಾಜ್ಯದ ಪ್ರಮುಖ ಅಡಿಕೆ ಬೆಳೆಯುವ ಸಹಕಾರಿ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳನ್ನು ತಡೆಹಿಡಿದಿರುವುದರಿಂದ ಲಕ್ಷಾಂತರ ಅಡಿಕೆ ಬೆಳೆಗಾರರು, ಸಹಕಾರಿ ಸಂಸ್ಥೆಗಳು ಹಾಗೂ ವ್ಯಾಪಾರಿಗಳಿಗೆ ಉಂಟಾಗಿರುವ ಸಂಕಷ್ಟದ ಪರಿಸ್ಥಿತಿಯ ಸಂಪೂರ್ಣ ಘಟನೆಯ ವಿವರವನ್ನು ಈ ಸಭೆಯು ಮಹಾರಾಷ್ಟ್ರದ ಮುಖ್ಯಮಂತ್ರಿಯವರ ಗಮನಕ್ಕೆ ತಂದಿತು.
ವಿಷಯದ ಗಂಭೀರತೆಯನ್ನು ಮನಗಂಡ ಮಹಾರಾಷ್ಟ್ರದ ಮುಖ್ಯಮಂತ್ರಿಯವರು ಮುಂಬರುವ ದಿನಗಳಲ್ಲಿ ಸೂಕ್ತ ದಾಖಲೆಗಳಿರುವ ಅಡಿಕೆ ಸಾಗಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಭೆಗೆ ಭರವಸೆ ನೀಡಿದರು.
ಅಡಿಕೆ ಬೆಳೆ ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದ ಲಕ್ಷಾಂತರ ರೈತ ಕುಟುಂಬಗಳ ಜೀವನಾಧಾರವಾಗಿದ್ದು, ನಮ್ಮ ಅಡಿಕೆ ಬೆಳೆಗಾರರ ಹಿತಾಸಕ್ತಿಯ ರಕ್ಷಣೆಗಾಗಿ ನಮ್ಮ ಪ್ರಯತ್ನಗಳು ನಿರಂತರವಾಗಿ ಮುಂದುವರೆಯಲಿವೆ ಎಂದು ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

=====================




