





ಪ್ರಜಾಸೇವೆ ಆಂದೋಲನ ಸಭೆಯ ಯಶಸ್ಸಿಗೆ ಸಿದ್ದತೆ ಕೈಗೊಳ್ಳಿ: ಜಿಲ್ಲಾಧಿಕಾರಿ ನಿರ್ದೇಶನ

ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಸೆಪ್ಟಂಬರ್ 5 ರಂದು ಅಂಕೋಲಾದ ಸ್ವಾತಂತ್ರ ಸಂಗ್ರಾಮ ಭವನದಲ್ಲಿ ಆಯೋಜಿಸಿರುವ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯ ಯಶಸ್ಸಿಗೆ ಅಗತ್ಯವಿರುವ ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾಸೇವೆ ಆಂದೋಲನ ಸಭೆ ನಡೆಯುವ ಸ್ಥಳದಲ್ಲಿ ಗ್ರಾಮ ಒನ್’ ಕೌಂಟರ್ ಗಳನ್ನು ಸ್ಥಾಪಿಸಿ, ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಸಾರ್ವಜನಿಕರ ಅರ್ಜಿಗಳನ್ನು ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಲು ವ್ಯವಸ್ಥೆ ಮಾಡಬೇಕು.
ಕುಂದು ಕೊರತೆ ಇತ್ಯರ್ಥಗೊಂಡ ಫಲಾನುಭವಿಗಳಿಗೆ ಸ್ಥಳದಲ್ಲೇ ಅನುಮೋದನಾ ಪತ್ರ/ಪರಿಹಾರ ಪ್ರಮಾಣಪತ್ರ ವಿತರಿಸಲು ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಸ್ಥಳದಲ್ಲಿ ಸಾರ್ವಜನಿಕರಿಗಾಗಿ ಕುಡಿಯುವ ನೀರು ಮತ್ತು ಮೂಲಭೂತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. ನಿರಂತರ ವಿದ್ಯುತ್ ಪೂರೈಕೆ ಆಗಬೇಕು ಮತ್ತು ಸಾರ್ವಜನಿಕರು ಆಗಮಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಸಭೆ ನಡೆಯುವ ಸ್ಥಳದಲ್ಲಿ ಪಂಚ ಗ್ಯಾರಂಟಿ ಯೋಜನೆಗಳೂ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಕುರಿತಂತೆ ಪ್ರಮುಖ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಿ, ಇಲಾಖೆಯ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಲು ಕೌಂಟರ್ ಗಳನ್ನು ತೆರೆದು ಫಾರ್ಮ್ ನೀಡಿ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಬೇಕು ಎಂದರು. ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಭಟ್ಕಳ ತಾಲೂಕಿನ ಮುರುಡೇಶ್ವರ, ಶಿರಸಿಯ ಜಾನ್ಮನೆ,
ಯಲ್ಲಾಪುರದ ಮಂಚಿಕೇರಿ, ಹಳಿಯಾದ ಸಾಂಬ್ರಾಣಿ ಮತ್ತು ಕುಮಟಾ ತಾಲೂಕಿನ ಕೂಜಳ್ಳಿ ಹೋಬಳಿಗಳಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಆಯೋಜಿಸಿಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಸಾರ್ವಜನಿಕರ ಬಳಿಗೇ ತೆರಳಿ, ಅವರ ಸಮಸ್ಯೆಗಳನ್ನು ಆಲಿಸಿ, ತುರ್ತು ಸ್ಪಂದನೆ ನೀಡುವ ಸರ್ಕಾರದ ಈ ಜನಪರ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಮತ್ತು ಯಶಸ್ವಿಯಾಗಿ ಆಯೋಜಿಸುವಂತೆ ಸಂಬಂಧÀಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.














